IMG 20211021 WA0044

ಬಡಕುಟುಂಬಗಳ ಸ್ವಾಸ್ಥ್ಯರಕ್ಷಣೆಗೆ ಆನ್ ಲೈನ್ ಗೇಮಿಂಗ್ ಮತ್ತು ಜೂಜು ನಿಷೇಧ….!

Genaral STATE

*ಬಡಕುಟುಂಬಗಳ ಸ್ವಾಸ್ಥ್ಯರಕ್ಷಣೆಗೆ ಆನ್ ಲೈನ್ ಗೇಮಿಂಗ್ ಮತ್ತು ಜೂಜು ನಿಷೇಧ*

*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಹುಬ್ಬಳ್ಳಿ.(ಕರ್ನಾಟಕ ವಾರ್ತೆ). ಅ.21: ಬಡಕುಟುಂಬಗಳ ಸ್ವಾಸ್ಥ್ಯ ಹಾಗೂ ಮನಶ್ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಮತ್ತು ಜೂಜಿನ ವಿರುದ್ಧ ಕಠಿಣ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯ ಹಳೆಯ ಸಿ.ಎ.ಆರ್ . ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ‌ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ಮಾತನಾಡಿದರು.

ಯುವಕರು ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಕಾಯ್ದೆಯನ್ನು ತರಲಾಗಿದೆ. ಗ್ಯಾಂಬ್ಲಿಂಗ್ ಕ್ಲಬ್‌ಗಳ ವಿರುದ್ಧ ಸಶಕ್ತ ಕಾನೂನು ತರಲಾಗಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ರಾಷ್ಟ್ರದ ಆಂತರಿಕ ಭದ್ರತೆ ಹಾಗೂ‌ ಶಾಂತಿಪಾಲನೆಗೆ ತಮ್ಮ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇದಾಗಿದೆ. ದೇಶದ ಪ್ರಗತಿಗೆ ಶಾಂತಿ ಅವಶ್ಯಕ. ಶಾಂತಿ ಇಲ್ಲದಿದ್ದರೆ ದೇಶದ ಪ್ರಗತಿ ಇಲ್ಲ. ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪೊಲೀಸರಿಗೆ ಕಾನೂನಿನ ಬಲವನ್ನು ನೀಡಿದಾಗ ಅವರು ಸಮರ್ಥವಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯ. ಎಫ್.ಎಸ್.ಎಲ್. ಲ್ಯಾಬ್ ಗಳನ್ನು ಪ್ರಾದೇಶಿಕ ಹಂತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆಫಿಸರ್ ಆನ್ ಕ್ರೈಮ್ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಪೊಲೀಸರು ಕುಟುಂಬವನ್ನು ಮರೆತು ಹಗಲಿರುಳು ದುಡಿಯುತ್ತಾರೆ. ಪೊಲೀಸರಿಗೆ ದೊರಕಬೇಕಾದ ಸವಲತ್ತುಗಳನ್ನು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಇಲಾಖೆಯಲ್ಲಿ ನೆನೆಗುದಿಗೆ ಬಿದ್ದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಪೊಲೀಸರ ಸೇವೆ ಉತ್ತಮ ಗೊಳಿಸಲು ಪ್ರಯತ್ನ ಮಾಡಲಾಗಿದೆ. ಹಿರಿಯ ಅಧಿಕಾರಿಗಳ ಹಂತದಲ್ಲಿ ಮಾತ್ರ ಪದೋನ್ನತಿ ಎಂಬ ಭಾವನೆ ಕೆಳ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇತ್ತು. ಆದರೆ ಕೆಳ ಹಂತದ ಸಿಬ್ಬಂದಿಗಳಿಗೆ ಪದೋನ್ನತಿ ನೀಡಲಾಗಿದೆ. 16 ಸಾವಿರ ಪೊಲೀಸರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆರೋಗ್ಯ ಭಾಗ್ಯ ಯೋಜನೆಯಡಿ ಪೊಲೀಸರು ಚಿಕಿತ್ಸೆ ಪಡೆಯಲು ಅನುದಾನ ಒದಗಿಸಲಾಗಿದೆ. ವೇತನ ಪರಿಷ್ಕರಣೆ ಸೇರಿದಂತೆ ಹಲವು ಸುಧಾರಣೆಗಳನ್ನು ತರಲಾಗಿದೆ .IMG 20211021 WA0042

ಈಗಾಗಲೇ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷಗಳಲ್ಲಿ 11 ಸಾವಿರ ಮನೆ ನಿರ್ಮಾಣಕ್ಕೆ ಯೋಜಿಸಲಾಗಿದೆ. ಪೊಲೀಸ್‌ರು ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಬೇಕು. ಪ್ರತಿಯೊಂದು ಕಾಲೇಜಿನಲ್ಲಿ ‌ಹೆಣ್ಣುಮಕ್ಕಳಿಗೆ ಸ್ವರಕ್ಷಣೆಗೆ ತರಬೇತಿ ನೀಡಲಾಗುವುದು ಎಂದರು.

ವಿಶ್ವದ ಹಲವು ರಾಷ್ಟ್ರಗಳು ಆಂತರಿಕ ಕ್ಷೋಭೆ, ಭಯೋತ್ಪಾದಕರ ಕೈಗೆ ಸಿಲುಕಿದೆ, ಅಲ್ಲಿನ ನಾಗರಿಕ ಬದುಕು ಶಾಂತಿಯುತವಾಗಿಲ್ಲ. ದೇಶದ ಎಲ್ಲಾ ಹಂತದ ಪೊಲೀಸರು ಜನರ ಭಯರಹಿತ ಜೀವನಕ್ಕಾಗಿ ಶ್ರಮ ಪಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ, ವಿದೇಶದಿಂದ ಎದುರಾಗುವ ಆಂತರಿಕ ಭದ್ರತಾ ಸವಾಲುಗಳನ್ನು ಎದುರಿಸುತ್ತಾರೆ. ನಾಗರಿಕರು ಕಾನೂನು ಕಾಪಾಡುವಲ್ಲಿ ಪೊಲೀಸರಿಗೆ ಸಹರಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನೈರುತ್ಯ ರೈಲ್ವೇ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕುಮಾರ್, ಆರ್.ಪಿ.ಎಫ್ ಐಜಿಪಿ ಅಲೋಕ್ ಕುಮಾರ್ ಇತರೆ ಗಣ್ಯರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿದರು.

ಪೊಲೀಸ್ ಆಯುಕ್ತ ಲಾಭೂರಾಮ್ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ದೇಶದಾದ್ಯಂತ ಹುತಾತ್ಮರಾದ ಪೊಲೀಸರ ಹೆಸರುಗಳನ್ನು ವಾಚಿಸಿ, ಗೌರವಿಸಿದರು.IMG 20211021 WA0041

2020 ರ ಅಕ್ಟೋಬರ್ 1 ರಿಂದ 2021 ರ ಆಗಸ್ಟ್ 31 ರವರೆಗೆ ದೇಶದಲ್ಲಿ 377 ಪೊಲೀಸರು ಕರ್ತವ್ಯ ಸಮಯದಲ್ಲಿ ಹುತಾತ್ಮರಾಗಿದ್ದಾರೆ. ಕರ್ನಾಟಕದಲ್ಲಿ 16 ಪೊಲೀಸರು ವೀರ ಮರಣ ಹೊಂದಿದ್ದಾರೆ.

ಸಹಾಯಕ ಪೊಲೀಸ್ ಆಯುಕ್ತೆ ಅನುಷಾ.ಜಿ ಪೊಲೀಸ್ ಪಥಸಂಚಲನ ತುಕಡಿಯ ಪರೇಡ್ ನೇತೃತ್ವ ವಹಿಸಿದ್ದರು. ಹುತಾತ್ಮರ ನೆನಪಿನಲ್ಲಿ ಮೂರು ಬಾರಿ ವಾಲಿ ಫೈರಿಂಗ್ ಸಿಡಿಸಿ, ರಾಷ್ಟ್ರಗೀತೆ ನುಡಿಸಲಾಯಿತು.