IMG 20220904 WA0027

BJP:ಸೆ.17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ…!

POLATICAL STATE


ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ: ಸಿ.ಟಿ.ರವಿ
ಬೆಂಗಳೂರು: ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ. 25ರಂದು ನಮ್ಮ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ. ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವನ್ನು ಆಚರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು.
ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದೇ 17ರಂದು ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ರಕ್ತದಾನಿಗಳ ವಿವರವನ್ನು ಪ್ರತಿ ಆಸ್ಪತ್ರೆಯಲ್ಲಿ ತಯಾರಿಸಿ ರಕ್ತದಾನಿಗಳ ವಿವರ ಸಿಗುವಂತೆ ಮಾಡಲಾಗುವುದು. ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗುವುದು. ಅಲ್ಲದೆ ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ ಶಿಬಿರ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.

IMG 20220904 WA0008


ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರಕಾರ ನಿರ್ದೇಶನ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅಮೃತ ಸರೋವರ ನಿರ್ಮಾಣ ಆಗಿದೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಸಸಿಗಳನ್ನೂ ನೆಡಲಿದ್ದಾರೆ. 2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ ಎಂದರು.
ಇದಲ್ಲದೆ ಜನಸಂವಾದ, ಜನೋತ್ಸವ ಕಾರ್ಯಕ್ರಮಗಳನ್ನೂ ಆಯೋಜಿಸಲು ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಿದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಇಂದು ಸುದೀರ್ಘವಾಗಿ ಚರ್ಚೆ ನಡೆಸಿದ್ದಾಗಿ ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಫಲಾನುಭವಿಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 65ರಿಂದ 80 ಪ್ರತಿಶತ ಜನರು ಇದ್ದಾರೆ. ಈ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವ ಕುರಿತು ಪ್ರಮುಖ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಿ, ಕಾರ್ಯಯೋಜನೆ ತಯಾರಿಸಲಾಗಿದೆ ಎಂದರು.
ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಹೆಸರನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ಮೂಲಸೌಕರ್ಯ ಮೂರು ದಿನಗಳಲ್ಲಿ ಮಾಡುವುದೇ? ಅಥವಾ 3 ವರ್ಷದಲ್ಲಿ ಮಾಡುವುದೇ? ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಾಣ ನಡೆಸಿದ್ದು ಬಿಜೆಪಿ ಸರಕಾರ ಬಂದ ಮೇಲೋ ಅಥವಾ ಹತ್ತಿಪ್ಪತ್ತು ವರ್ಷದ ಹಿಂದಿನಿಂದಲೂ ರಾಜಕಾಲುವೆ ಒತ್ತುವರಿ ಪ್ರವೃತ್ತಿ ನಡೆದುಕೊಂಡು ಬಂದಿದೆಯೇ? ಕೆರೆಗಳನ್ನು ಮುಳುಗಿಸಿದ್ದು ಯಾರು? ಕೆರೆಗಳನ್ನು ಅಕ್ರಮ ಬಡಾವಣೆಯಾಗಿ ನಿರ್ಮಿಸಿದವರು ಯಾರು? ಅವರೆಲ್ಲರೂ ಉತ್ತರಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಕುಮಾರಸ್ವಾಮಿಯವರು ಜಲಧಾರೆ ಕಾರ್ಯಕ್ರಮದಿಂದ ರಾಜ್ಯದ ತುಂಬ ಮಳೆ ಆಗಿದೆ ಎಂದಿದ್ದಾರೆ. ಅವರಿಂದಲೇ ಮಳೆ ಆಗಿದ್ದರೆ ಅತಿವೃಷ್ಟಿಗೂ ಅವರೇ ಕಾರಣ ಇರಬೇಕಲ್ಲವೇ ಎಂದು ಕೇಳಿದರು. ರಾಮನಗರಕ್ಕೆ ಜಾಸ್ತಿ ಪ್ರೀತಿ ಇದ್ದ ಕಾರಣ ಅತಿ ಹೆಚ್ಚು ಮಳೆ ಬಂದಿರಬೇಕು ಎಂದು ನುಡಿದರು. ಅವರ ಹೇಳಿಕೆ ಸತ್ಯ ಎಂದು ಭಾವಿಸುವುದಿಲ್ಲ; ಇವರು ಜಲಧಾರೆ ಮಾಡಿದ್ದು ಕರ್ನಾಟಕದಲ್ಲಿ. ಆದರೆ, ದೇಶದ ತುಂಬೆಲ್ಲ ಮಳೆಯಾಗಿದೆ ಎಂದು ತಿಳಿಸಿದರು.