DSC 3599

Tumkur:ಪ್ರತಿ ಪಂಚಾಯತಿಯಲ್ಲಿ ‘ಅಮೃತ ಸರೋವರ’ ನಿರ್ಮಾಣಕ್ಕೆ ಸೂಚನೆ…!

DISTRICT NEWS ತುಮಕೂರು

ಜಿಲ್ಲೆಯ ಪ್ರತಿ ಪಂಚಾಯತಿಯಲ್ಲಿ ‘ಅಮೃತ ಸರೋವರ’ ನಿರ್ಮಾಣಕ್ಕೆ ಸೂಚನೆ
ತುಮಕೂರು(ಕ.ವಾ.) ನ.16: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ‘ಅಮೃತ ಸರೋವರ’ಗಳನ್ನು ನಿರ್ಮಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಹಾಗೂ ದಿಶಾ ಸಮಿತಿ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು.
ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಮಿತಿ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ಹನಿ ನೀರೂ ಸಹ ವ್ಯರ್ಥವಾಗಬಾರದೆನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿಗಳ ಆಶಯವಾದ ‘ಅಮೃತ ಸರೋವರ’ ನಿರ್ಮಾಣ ಕಾರ್ಯವನ್ನು ಅತಿ ಜರೂರಾಗಿ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ದಿಶಾ ಸಭೆಯಲ್ಲಿ ಸೂಚಿಸಿದ್ದೇನೆ ಎಂದು ಹೇಳಿದರು.
ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲಿಸಿ ದಿಶಾ ಸಮಿತಿ ಅಧ್ಯಕ್ಷರನ್ನಾಗಿ ಸರ್ಕಾರ ನನ್ನನ್ನು ನೇಮಿಸಿದ್ದು, ಜಿಲ್ಲೆಯಲ್ಲಿ ಕೇಂದ್ರ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ನರೇಗಾ ಯೋಜನೆಯಡಿ ಅಮೃತ ಸರೋವರಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ 70 ಅಮೃತ ಸರೋವರಗಳನ್ನು ಗುರುತಿಸಲಾಗಿದ್ದು, 20ಕ್ಕೂ ಹೆಚ್ಚು ಅಮೃತ ಸರೋವರಗಳನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದರಲ್ಲದೆ, ನರೇಗಾ ಮೂಲಕ ಎನ್‍ಆರ್‍ಎಲ್‍ಎಂ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಗೆ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆನ್ನುವ ಗುರಿ ಹೊಂದಲಾಗಿದ್ದು, ಈಗಾಗಲೇ 50 ಕಟ್ಟಡಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಜಿಲ್ಲೆಯ 600ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಆವರಣ ಗೋಡೆ, 440 ಶಾಲೆಗಳಲ್ಲಿ ಶೌಚಾಲಯ, 334 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಾಣ ಮಾಡುವುದರ ಜೊತೆಗೆ ನೀರಿನ ಸಂರಕ್ಷಣೆಗಾಗಿ 391 ಶಾಲೆ ಹಾಗೂ ಪಂಚಾಯತಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನವನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೇಂದ್ರದ ಜಲ್ ಜೀವನ್ ಮಿಷನ್ ಯೋಜನೆಯಡಿ 84 ಗ್ರಾಮಗಳಲ್ಲಿ 16596 ಮನೆಗಳಿಗೆ ನಳ ಸಂಪರ್ಕ ನೀಡಿ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದರು.
ಪ್ರಧಾನಿಗಳ ಪರಿಕಲ್ಪನೆಯಂತೆ ನೀರು ಸಂರಕ್ಷಣೆಗಾಗಿ ಅಂತರ್ಜಲ ಮರುಪೂರಣಗೊಳಿಸಲು ಜಿಲ್ಲೆಯಲ್ಲಿ 25 ಸಮುದಾಯ ಸೋಕ್ ಪಿಟ್‍ಗಳನ್ನು ನಿರ್ಮಿಸಲಾಗಿದ್ದು, 5851 ವೈಯಕ್ತಿಕ ಸೋಕ್ ಪಿಟ್‍ಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಬೇಚರ್ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಅಧಿಸೂಚನೆ ಹೊರಡಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ವಿಶೇಷ ಅಧಿಕಾರ ನೀಡಿದ್ದು, ಜಿಲ್ಲೆಯಲ್ಲಿ ಈಗಾಗಲೇ 542 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆಯಲ್ಲದೆ, ಸರ್ವೆ ಕಾರ್ಯ ಕೈಗೊಂಡು 194 ಕಂದಾಯ ಗ್ರಾಮಗಳೆಂದು ಅಂತಿಮವಾಗಿ ಅಧಿಸೂಚನೆಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೈಗೊಂಡಿರುವ ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ತುಮಕೂರು-ದಾವಣಗೆರೆ ರೈಲು ಮಾರ್ಗದಲ್ಲಿ ದಾವಣಗೆರೆಯಿಂದ ಭರಮಸಾಗರದವರೆಗೂ ಭೂಸ್ವಾಧೀನಪಡಿಸಿಕೊಳ್ಳಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ

DSC 3588

ಭರಮಸಾಗರದವರೆಗೂ ಭೂಸ್ವಾಧೀನಪಡಿಸಿಕೊಳ್ಳಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಭರಮಸಾಗರದಿಂದ ಚಿತ್ರದುರ್ಗದವರೆಗಿನ 18 ಕಿ.ಮೀ. ಮಾರ್ಗದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ತುಮಕೂರು-ರಾಯದುರ್ಗ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ವಿಶೇಷ ಭೂ-ಸ್ವಾಧೀನ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ನವೆಂಬರ್ ಮಾಹೆಯ ಅಂತ್ಯದಲ್ಲಿ ರೈಲು ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧ ಭೂಸ್ವಾಧೀನ ಹಾಗೂ ಹಕ್ಕುಪತ್ರ ವಿತರಣೆ ಕುರಿತು ಚರ್ಚಿಸಲು ಕಂದಾಯ ಮಂತ್ರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ 2022-23ನೇ ಸಾಲಿನ ಮೊದಲನೇ ಮತ್ತು 2ನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ನರೇಗಾ, ಕೃಷಿ, ತೋಟಗಾರಿಕೆ, ಕೌಶಲ್ಯಾಭಿವೃದ್ಧಿ, ಸ್ವಚ್ಛಭಾರತ್ ಮಿಷನ್, ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಮತ್ತಿತರ ಯೋಜನೆಗಳ ಇಲಾಖಾವಾರು ಪ್ರಗತಿ ಪರಿಶೀಲಿಸಿದರು.

ಅರ್ಹರಿಗೆ ಉದ್ಯೋಗ ನೀಡಿ:-
ಸಭೆಯಲ್ಲಿ ನರೇಗಾ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು ಹಿಂದುಳಿದ, ಬಡವರ್ಗದ ಅರ್ಹ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಕಡ್ಡಾಯವಾಗಿ ಉದ್ಯೋಗ ಒದಗಿಸಬೇಕು. ಪ್ರತಿ ಫಲಾನುಭವಿಗೆ 100 ದಿನಗಳ ಉದ್ಯೋಗ ನೀಡಿ ಸಕಾಲದಲ್ಲಿ ನಿಗಧಿತ ಕೂಲಿ ಪಾವತಿಸಬೇಕು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಪಡೆದು ಇಲಾಖಾ ಅಧಿಕಾರಿಗಳು ನರೇಗಾ ಯೋಜನೆಯ ನಿಗಧಿತ ಗುರಿಯನ್ನು ಸಾಧಿಸಬೇಕು ಎಂದು ಕೃಷಿ, ತೋಟಗಾರಿಕೆ ಸೇರಿದಂತೆ ನರೇಗಾ ಯೋಜನೆ ಅನುಷ್ಠಾನಗೊಳಿಸುವ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ನರೇಗಾ ಯೋಜನೆಯಡಿ ಕೃಷಿ ಇಲಾಖೆಯಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಶೇ.3.87, ಕೊರಟಗೆರೆಯಲ್ಲಿ ಶೇ.3.53, ತಿಪಟೂರು ತಾಲ್ಲೂಕಿನಲ್ಲಿ ಶೇ. 10.92ರಷ್ಟು ಸಂಚಿತ ಗುರಿ ಸಾಧಿಸಲಾಗಿದೆ. ಅತಿ ಕಡಿಮೆ ಸಾಧನೆಯಾಗಲು ಕಾರಣವೇನೆಂದು ಕೃಷಿ ಜಂಟಿ ನಿರ್ದೇಶಕರನ್ನು ಸಚಿವರು ತರಾಟೆಗೆ ತೆಗೆದುಕೊಂಡಾಗ ಮಾಹಿತಿ ನೀಡಿದ ಕೃಷಿ ಜಂಟಿ ನಿರ್ದೇಶಕ ರವಿ ಅವರು, 2022-23ನೇ ಸಾಲಿನಲ್ಲಿ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ 2022ರ ಅಕ್ಟೋಬರ್ ಅಂತ್ಯಕ್ಕೆ 1,68,000 ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಿದ್ದು, ರೈತರ ಜಮೀನಿನಲ್ಲಿ ಈವರೆಗೆ ಕಂದಕ ಬದು, ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು 98785 ಮಾನವ ದಿನಗಳನ್ನು ಸೃಜಿಸಲಾಗಿದೆ. ಅಕಾಲಿಕ ಮಳೆಯಿಂದ ಸಾಧನೆ ಕುಂಠಿತವಾಗಿದ್ದು, ಬೆಳೆ ಕೊಯ್ಲು ನಂತರ ನಿಗಧಿತ ಗುರಿಯನ್ನು ಸಾಧಿಸಲಾಗುವುದು ಎಂದು ಮಾಹಿತಿ ನೀಡಿದರಲ್ಲದೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿಗಾಗಿ 129425 ರೈತರು ನೋಂದಾಯಿಸಿಕೊಂಡಿದ್ದು, ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಹೆಚ್ಚಿನ ರೈತರು ಈ ವಿಮಾ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ನಂತರ ಮಾತನಾಡಿದ ಸಚಿವರು ‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯಡಿ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ತೆಂಗಿನ ಉತ್ಪನ್ನಗಳ ತಯಾರಿಕೆಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಉತ್ತೇಜನ ನೀಡಿ ಸಾಲ ಸೌಲಭ್ಯ ಕಲ್ಪಿಸಬೇಕು ಎಂದರಲ್ಲದೆ, ಸಾಲ ಸೌಲಭ್ಯ ಕೋರಿ ಈವರೆಗೂ ಸಲ್ಲಿಕೆಯಾದ 91 ಅರ್ಜಿಗಳ ಪೈಕಿ ಕೇವಲ 33 ಫಲಾನುಭವಿಗಳಿಗೆ ಮಾತ್ರ ಸಾಲ ಮಂಜೂರು ಮಾಡಲಾಗಿದೆ. ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕೆಂದು ನಿರ್ದೇಶನ ನೀಡಿದರು.
ತೋಟಗಾರಿಕೆ ಉಪನಿರ್ದೇಶಕ ರಘು ಮಾತನಾಡಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ 18191 ರೈತರು ನೋಂದಾಯಿಸಿಕೊಂಡಿದ್ದಾರೆ. ವಿಮೆ ಮಾಡಿಸಲು ಮಾವು, ಅಡಿಕೆ, ದಾಳಿಂಬೆ ಹಾಗೂ ಪಪ್ಪಾಯ ಬೆಳೆಯನ್ನು ನಿಗಧಿಪಡಿಸಿದ್ದು, ಹವಾಮಾನ ವೈಪರಿತ್ಯ ಸಂದರ್ಭದಲ್ಲಿ ಅರ್ಹರಿಗೆ ವಿಮೆ ಹಣವನ್ನು ಪಾವತಿಸಲಾಗುವುದು. 2020-21ನೇ ಸಾಲಿನಲ್ಲಿ 18910 ರೈತರಿಗೆ 1872.62 ಲಕ್ಷ ರೂ. ವಿಮೆ ಹಣವನ್ನು ಸಂದಾಯ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ವೃತ್ತಿ ಕೌಶಲ್ಯ ತರಬೇತಿ ನೀಡಿ ಶೇ. 100ರಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸಬೇಕು. ತರಬೇತಿ ನೀಡಿ ಉದ್ಯೋಗ ಒದಗಿಸದ ಎನ್‍ಜಿಒ(ಸರ್ಕಾರೇತರ ಸಂಸ್ಥೆ)ಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ತರಬೇತಿ ನೀಡಲು ಮತ್ತೊಮ್ಮೆ ನೋಂದಣಿಗೆ ಅವಕಾಶ ನೀಡಬಾರದೆಂದು ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಅವರಿಗೆ ನಿರ್ದೇಶನ ನೀಡಿದರು.
ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳಿಗೆ ಇಚ್ಛಾಶಕ್ತಿ ಇರಬೇಕು. ಸಭೆಗೆ ಅಂಕಿ ಅಂಶಗಳನ್ನು ಒದಗಿಸುವುದಷ್ಟೇ ಅಧಿಕಾರಿಗಳ ಕರ್ತವ್ಯವಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸದುಪಯೋಗವನ್ನು ತಲುಪಿಸಿದಾಗ ಮಾತ್ರ ಸರ್ಕಾರದ ಸದುದ್ದೇಶ ಸಾರ್ಥಕವಾಗುತ್ತದೆ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಅರ್ಹರಿಗೆ ಹಕ್ಕುಪತ್ರ ನೀಡುವ ಸಂಬಂಧ ಪ್ರತ್ಯೇಕ ಸಭೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡುತ್ತಾ, ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ 1,000 ಹಕ್ಕುಪತ್ರ ವಿತರಣೆಗೆ ಗುರಿ ನಿಗಧಿಪಡಿಸಿಕೊಳ್ಳಲಾಗಿದ್ದು, ಶೀಘ್ರ ಕಾರ್ಯಪ್ರವೃತ್ತರಾಗಬೇಕೆಂದು ಸಚಿವರ ಅವಗಾಹನೆಗೆ ತಂದರು.

DSC 3633


ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ಬಯಲು ಶೌಚಮುಕ್ತ ಜಿಲ್ಲೆಯೆಂದು ಘೋಷಣೆಯಾಗಿದ್ದರೂ ಸಹ ಶಿರಾ ನಗರಸಭೆ ವ್ಯಾಪ್ತಿಯ ಕಲ್ಲುಕೋಟೆ ನಿವಾಸಿಗಳು ಬಯಲು ಶೌಚವನ್ನೇ ಅವಲಂಬಿಸಿದ್ದಾರೆಂದು ದೂರು ಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಆಂಜಿನಪ್ಪ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕ್‍ಗಳು ರೈತರಿಗೆ ಕಡ್ಡಾಯವಾಗಿ ಸಾಲ ನೀಡಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಪಡೆದ ಪ.ಜಾತಿ/ಪಂಗಡದ ಫಲಾನುಭವಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ವರ್ಗೀಕರಿಸಿ ಮಾಹಿತಿ ನೀಡಬೇಕೆಂದು ಲೀಡ್‍ಬ್ಯಾಂಕ್ ಮ್ಯಾನೇಜರ್ ಬಿ.ಡಿ. ಯಲ್ಲೂರ್ಕರ್ ಅವರಿಗೆ ಸೂಚನೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವಿವಿಧ ಕಾಮಗಾರಿಗಳು ಡಿಸೆಂಬರ್ ಅಂತ್ಯದವರೆಗೆ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಒಟ್ಟಾರೆ 930 ಕೋಟಿ ರೂ. ವೆಚ್ಚದಲ್ಲಿ 178 ಕಾಮಗಾರಿಗಳನ್ನು ಕೈಗೊಂಡಿದ್ದು, ಈ ಪೈಕಿ 146 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ಸಭೆಗೆ ವಿವರಣೆ ನೀಡಿದರು.
ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ದಿಶಾ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.