IMG20240719160510 scaled

Tumkur : ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ…!

DISTRICT NEWS ತುಮಕೂರು

ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ : ತುಳಸಿ ಮದ್ದಿನೇನಿ

ತುಮಕೂರು(ಕ.ವಾ.)ಜು.19: ಮಕ್ಕಳ ಕಲಿಕೆ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಮಕ್ಕಳಿಗೆ ಸವಲತ್ತುಗಳನ್ನು ನೀಡುವುದರೊಂದಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರನ್ನೇ ನೇರ ಹೊಣೆ ಮಾಡಿ ಅವರ ವೇತನ ಬಡ್ತಿಯನ್ನು ಕಡಿತಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕಳೆದ ಜುಲೈ 8 ಹಾಗೂ 9ರಂದು ನಡೆದ ಮುಖ್ಯಮಂತ್ರಿಗಳ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ವಿವಿಧ ಶಾಲೆಗಳಿಗೆ ತಾವು ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಕ್ಕಳು ಕಲಿಕೆಯಿಂದ ಹಿಂದುಳಿದಿರುವುದು ತಿಳಿದು ಬಂದಿದೆ. ಮಕ್ಕಳು ಕನ್ನಡ ಅಕ್ಷರಗಳನ್ನೇ ಗುರುತಿಸಲು ಕಷ್ಟಪಡುತ್ತಿದ್ದಾರೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರಿಗೆ ಪ್ರಾಥಮಿಕ ಶಾಲಾ ಹಂತದಲ್ಲಿ ಗುಣಮಟ್ಟದ ಶಿಕ್ಷಣ ಅಗತ್ಯ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹೆಚ್ಚಿನ ಸಮಯವನ್ನು ಸಭೆಗಳಿಗೆ ವ್ಯರ್ಥ ಮಾಡದೆ ಶಾಲೆಗಳಿಗೆ ತೆರಳಿ ಮಕ್ಕಳ ಕಲಿಕೆಯ ಬಗ್ಗೆ ಪರೀಶೀಲನೆ ನಡೆಸಿ ಮಕ್ಕಳ ಕಲಿಕಾಸಕ್ತಿಯನ್ನು ಹೆಚ್ಚಿಸಬೇಕೆಂದು ನಿರ್ದೇಶನ ನೀಡಿದರು.

IMG 20240719 WA0075
ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ವಾರದಲ್ಲಿ 5 ದಿನ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳ ಹಾಜರಾತಿ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಓದಿನಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಗಮನ ನೀಡಬೇಕೆಂದರಲ್ಲದೆ, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಗೊಳಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಯೋಜನೆಗಳ ಅನುμÁ್ಠನಕ್ಕೆ ತೆರೆಯಲಾದ ಬ್ಯಾಂಕ್ ಖಾತೆಗಳು ಯೋಜನೆ ಮುಕ್ತಾಯಗೊಂಡ ನಂತರವೂ ಚಾಲ್ತಿಯಲ್ಲಿರುವುದು ಕಂಡುಬಂದಿದ್ದು, ಅನಗತ್ಯ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿಗಳು ಜುಲೈ 31ರೊಳಗಾಗಿ ಅನಗತ್ಯ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಲು ಕ್ರಮ ಕೈಗೊಂಡು ಜಿಲ್ಲಾ ಪಂಚಾಯತಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಜನ ಸ್ಪಂದನ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲು ಅರ್ಜಿಗಳಿಗೆ ಕೇವಲ ಹಿಂಬರಹವನ್ನು ನೀಡಿ ಕಳುಹಿಸದೆ ಗುಣಮಟ್ಟದ ಪರಿಹಾರ ನೀಡಬೇಕು. ವಿವಿಧ ಇಲಾಖೆಗಳು ವಸತಿ ನಿಲಯ/ ಶಾಲಾ ಕಟ್ಟಡಗಳಿಗೆ ಮಂಜೂರಾಗಿರುವ ನಿವೇಶನಗಳ ಮಾಹಿತಿಯನ್ನು ತಮ್ಮ ಇಲಾಖೆಯ ಕೇಂದ್ರ ಕಚೇರಿಗೆ ಮಾಹಿತಿ ನೀಡಬೇಕು ಎಂದರು.
ಕೆಲವು ಅಧಿಕಾರಿಗಳು ಕಚೇರಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗದೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಎಲ್ಲಾ ಇಲಾಖೆಗಳಲ್ಲೂ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಬೇಕು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಪಾವತಿ ವಿಳಂಬವಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ವಿಳಂಬಕ್ಕೆ ಪ್ರಮುಖ ಕಾರಣವಾಗಿರುವ ವಿದ್ಯಾರ್ಥಿಗಳ ಆಧಾರ್ ಜೋಡಣೆ ಕಾರ್ಯಯನ್ನು ಶೀಘ್ರವಾಗಿ ಕೈಗೊಂಡು ವಿದ್ಯಾರ್ಥಿ ವೇತನ ಪಾವತಿ ಮಾಡುವಂತೆ ನಿರ್ದೇಶಿಸಿದರು.
ಯೋಜನೆ ಅನುಷ್ಟಾನ ಇಲಾಖೆಗಳು ವಿವಿಧ ಯೋಜನೆಗಳಡಿ ವರ್ಷಾಂತ್ಯದವರೆಗೂ ಕಾಯದೆ ಫಲಾನುಭವಿಗಳನ್ನು ಆಗಸ್ಟ್ 31ರೊಳಗೆ ಆಯ್ಕೆ ಮಾಡಬೇಕೆಂದರಲ್ಲದೆ, ಉಳಿದಂತೆ ಸಭೆಯಲ್ಲಿ ಮಣ್ಣು ಪರೀಕ್ಷೆ, ಕುಡಿಯುವ ನೀರಿನ ಪರೀಕ್ಷೆ, ನರೇಗಾ ಯೋಜನೆ, ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆ, ಸ್ವಚ್ಛ ಭಾರತ್ ಮಿಷನ್, ಆರೋಗ್ಯ ಕ್ಷೇಮ ಕೇಂದ್ರ, ನಮ್ಮ ಕ್ಲಿನಿಕ್, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಪೌತಿ ಖಾತೆ ಆಂದೋಲನ, ಜಲಜೀವನ್ ಮಿಷನ್ ಸೇರಿದಂತೆ ಮತ್ತಿತರ ಸರ್ಕಾರಿ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿ ನಿಗಧಿತ ಕಾಲಾವಧಿಯೊಳಗೆ ಪ್ರಸಕ್ತ ವರ್ಷದ ಯೋಜನೆಗಳನ್ನು ಅನುಷ್ಟಾನಗೊಳಿಸಿ ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.IMG 20240719 WA0071

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಸೇರಿದಂತೆ ಉಪವಿಭಾಗಾಧಿಕಾರಿಗಳು, ವಿವಿಧ ತಾಲ್ಲೂಕು ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.