Screenshot 2025 06 20 17 52 46 017 com.google.android.youtube

Karnataka : ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ..!

POLATICAL STATE

*ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ*

*ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ*

*ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ*

*ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದ ಕೇಂದ್ರ ಸಚಿವರು*

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು.

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಅವರು; ಓ ಅದಾ..? ನಿಮಗೆ ಅಚ್ಚರಿನಾ? ಅಚ್ಚರಿನಾ? ಅದು ನಿರಂತರವಾಗಿ ನಡೆಯುತ್ತಿದೆ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣಭೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಅವರು ಪ್ರಶ್ನಿಸಿದರು.

ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಅವರು ಕಿಡಿಕಾರಿದರು.

*ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ:*

ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನಾನು ಮೊದಲೇ ಹೇಳಿದ್ದೇನೆ. ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.

ಭೂಮಿ ತೆರವಿಗೆ ರಚಿಸಿಲಾಗಿರುವ ಎಸ್ಐಟಿಗೆ ಹೈಕೋರ್ಟ್ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು; ಅದು 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ. ಅಲ್ಲಿ ಯಾವುದೇ ರೀತಿಯ ಒತ್ತುವರಿ ಆಗಿಲ್ಲ. ಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಅದು ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ ಎಂದರು.

ರಾಜಕೀಯ ದ್ವೇಷ ಮಾಡುತ್ತಿದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ. ಆದರೆ ಇವರು ಮಾಡುತ್ತಿರುವುದು ಏನು? ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಟ್ಟುಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾಲವೇ ಉತ್ತರ ನೀಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

*ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ*

2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂದು ಡಿಸಿಎಂ ಡಿಕೆಶಿ ನೀಡಿರುವ ಅಹಂಕಾರದ ಹೇಳಿಕೆಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ ಅವರು; ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ. ದಾರಿದ್ರ್ಯ ಇರುವುದು ಅವರಿಗೆ. ಮನುಷ್ಯತ್ವದ ದಾರಿದ್ರ್ಯ ಅವರಿಗೆ ಇದೆ. ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ. ಆ ವ್ಯಕ್ತಿಯ ಪಾಪದ ಹಣ, ಲೂಟಿ ಹೊಡೆದಿರುವ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ? ಎಂದು ಡಿಸಿಎಂ ಡಿಕೆಶಿ ವಿರುದ್ಧ ಹೆಚ್ ಡಿಕೆ ವಾಗ್ದಾಳಿ ನಡೆಸಿದರು.

ಡಿ.ಕೆ.ಸುರೇಶ್ ಅವರನ್ನು ಬಮುಲ್ ಅಧ್ಯಕ್ಷ ಮಾಡಿಕೊಂಡಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಸರ್ಕಾರ ಇದೆ, ಏನು ಬೇಕಾದರೂ ಮಾಡಿಕೊಳ್ಳುತ್ತಾರೆ. ಸಮಯ ಬರುತ್ತೆ ಅದಕ್ಕೆ ಉತ್ತರ ಕೋಡೋಣ ಎಂದರು

 

.

 

Leave a Reply

Your email address will not be published. Required fields are marked *