IMG 20260419 WA0004

Karnataka : ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ…..!

Genaral STATE

*ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ*:*ಮುಖ್ಯಮಂತ್ರಿ ಸಿದ್ದರಾಮಯ್ಯ*

*ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ*: *ಸಿ.ಎಂ ಸ್ಪಷ್ಟನೆ*

ಹಾವೇರಿ, ರಾಣೇಬೆನ್ನೂರು: ಏಪ್ರಿಲ್ 19: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ*

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

*ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ*
ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದರು.

*ಪ್ರಧಾನಮಂತ್ರಿಗಳಿಂದ ರಾಜಕೀಯ*

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದರು.

*ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ*
450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದರು.

*ಮೇಲ್ಮನವಿಗೆ ಅವಕಾಶ*

ಜನಪ್ರತಿನಿಧಿಗಳು ಜೈಲು ಸೇರುತ್ತಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

*ಮಟ್ಕಾ ದಂಧೆ ನಿಯಂತ್ರಣದಲ್ಲಿದೆ*
ರಾಣೆಬೆನ್ನೂರು ಸುತ್ತ ಮುತ್ತ ಮಟ್ಕಾ ದಂಧೆ ವ್ಯಾಪಕವಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಥಳೀಯ ಶಾಸಕರು ಕ್ರಮ ಕೈಗೊಂಡಿದ್ದಾರೆ ಎಂದರು. ಪ್ರಸ್ತುತ ಮಟ್ಕಾ ದಂಧೆ ನಿಯಂತ್ರಣದಲ್ಲಿದೆ ಎಂದರು.

Leave a Reply

Your email address will not be published. Required fields are marked *