ಜನಪರ ಹಾಗೂ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಕಡ್ಡಾಯವಾಗಿ ತಾಲೂಕು ಮಟ್ಟಕ್ಕೆ ತೆರಳಿ ಜನರ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಿ – ಡಿ.ಕೆ.ಶಿ
ಬೆಂಗಳೂರು, ಜೂನ್ 04, (ಕರ್ನಾಟಕ ವಾರ್ತೆ) :ರಾಜ್ಯದಲ್ಲಿ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಕಟ್ಟುನಿಟ್ಟಿನ ಬಯೋಮೆಟ್ರಿಕ್ ಮತ್ತು ಕೇಂದ್ರ ಸ್ಥಾನ ವಾಸ್ತವ್ಯ:
ತಳಮಟ್ಟದ ಅಧಿಕಾರಿಗಳು ಸರ್ಕಾರದ ಮುಖವಾಡ ಇದ್ದಂತೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಬೆಳಿಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯಾವುದೇ ನಿರ್ಲಕ್ಷ್ಯ ನಾನು ಸಹಿಸುವುದಿಲ್ಲ ಎಂದು ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದರು.
ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಹೂಡಬೇಕು. ಇದನ್ನು ಖಾತ್ರಿಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡು ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಸೂಚಿಸಿದ್ದಾರೆ.
ಒತ್ತಡಗಳಿಗೆ ಮಣಿದು ಕಾನೂನು ಬಾಹಿರ ಕೆಲಸ ಮಾಡಬೇಡಿ. ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೆ ನೇರವಾಗಿ ನನಗೆ ಅಥವಾ ಸಚಿವರಿಗೆ ತಿಳಿಸಿ ಎಂದು ಅಧಿಕಾರಿಗಳಿಗೆ ಧೈರ್ಯ ತುಂಬಿದರು.
ಜನರ ಮನೆ ಬಾಗಿಲಿಗೆ ಆಡಳಿತ:
ಕೇವಲ ಕಚೇರಿಗೆ ಸೀಮಿತವಾಗದೆ, ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿವಾರ ತಾಲೂಕು ಮಟ್ಟಕ್ಕೆ ತೆರಳಿ ಜನರ ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಅರಿತು ತಕ್ಷಣ ಪರಿಹಾರ ಒದಗಿಸುವ ಕೆಲಸ ಮಾಡಬೇಕು. ಮತ್ತು ಅದರ ವರದಿಯನ್ನು ನೇರವಾಗಿ ಮುಖ್ಯಮಂತ್ರಿಗಳ ಗಮನಕ್ಕೂ ತರಬೇಕು. ಸಚಿವರು ಕೂಡ ನಿರಂತರವಾಗಿ ತಾಲೂಕು ಪ್ರವಾಸ ಮಾಡುವಂತೆ ತಿಳಿಸಿದರು.
ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ಬೂಸ್ಟರ್ ಡೋಸ್:
50 ಸಾವಿರ ಶಿಕ್ಷಕರ ನೇಮಕ :
ರಾಜ್ಯದಲ್ಲಿ ಸದ್ಯ ಖಾಲಿ ಇರುವ 50,000 ಶಿಕ್ಷಕರ ಕೊರತೆಯನ್ನು ಹಂತ ಹಂತವಾಗಿ ನೀಗಿಸಲಾಗುವುದು. ಶಾಲೆಗಳ ಅಭಿವೃದ್ಧಿಗೆ ಸಿಎಸ್ ಆರ್ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು.
ಉಚಿತ ಬಸ್ ಪಾಸ್ ವಿಸ್ತರಣೆ:
ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪಾಸ್ ಸೌಲಭ್ಯವನ್ನು ಇನ್ಮುಂದೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದ್ದು, ತಕ್ಷಣ ಜಾರಿಗೆ ತರಲು ಸೂಚಿಸಿದರು.
ಖಾಸಗಿ ಉದ್ಯೋಗ ವಿನಿಮಯ ಕೇಂದ್ರ:
ಖಾಸಗಿ ವಲಯದಲ್ಲಿರುವ ಉದ್ಯೋಗಗಳು ನಮ್ಮ ರಾಜ್ಯದ ಯುವಜನತೆಗೆ ಸುಲಭವಾಗಿ ಸಿಗುವಂತೆ ಮಾಡಲು ಪ್ರತ್ಯೇಕ ಉದ್ಯೋಗ ವಿನಿಮಯ ಕೇಂದ್ರಗಳನ್ನು ಆರಂಭಿಸಲಾಗುವುದು. ಖಾಲಿಯಿರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಕಾಲಮಿತಿಯ ವೇಳಾಪಟ್ಟಿ ಸಿದ್ಧಪಡಿಸಲು ಇಲಾಖೆಗಳಿಗೆ ಆದೇಶಿಸಲಾಗಿದೆ.
ಗ್ರಾಮೀಣ ಆರ್ಥಿಕತೆ ಮತ್ತು ಬೆಂಗಳೂರಿನ ಪ್ರಗತಿ:
ಗ್ರಾಮೀಣ ಭಾಗದಿಂದ ನಗರಕ್ಕೆ ವಲಸೆ ಹೋಗುತ್ತಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಗ್ರಾಮೀಣ ಆರ್ಥಿಕತೆ ಉತ್ತೇಜನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಲ್ಲಿನ ಐಟಿ ವೃತ್ತಿಪರರು ಹಾಗೂ ವೈದ್ಯಕೀಯ ಸಂಪನ್ಮೂಲವನ್ನು ಬಳಸಿಕೊಂಡು ನಗರದ ಅಭಿವೃದ್ಧಿಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದರು.
ಯುವ ಸಬಲೀಕರಣ ಮತ್ತು ಹೊಸ ಪ್ರವಾಸೋದ್ಯಮ ನೀತಿ:
ಭಾರತ್ ಜೋಡೋ ಯುವ ಸಂಘ ಕ್ಲಬ್:
ರಾಜ್ಯಾದ್ಯಂತ 10,000 ಯುವ ಸಂಘ ಕ್ಲಬ್ಗಳನ್ನು ಸ್ಥಾಪಿಸಲಾಗುವುದು. ಪ್ರತಿ ಕ್ಲಬ್ಗೆ ತಲಾ 10 ಲಕ್ಷ ರೂ. ನಂತೆ ಒಟ್ಟು 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ:
ಕರಾವಳಿ ಭಾಗದ ಸಮಗ್ರ ಪ್ರಗತಿಗಾಗಿ ಶೀಘ್ರದಲ್ಲೇ ಅತ್ಯಾಧುನಿಕ ‘ಹೊಸ ಪ್ರವಾಸೋದ್ಯಮ ನೀತಿ’ಯನ್ನು ಜಾರಿಗೆ ತರಲಾಗುವುದು.
ರೌಡಿಸಂ ಮಟ್ಟ ಹಾಕಲು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೆÇಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೌಡಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟ ಹಾಕಲು ತಾಲೂಕು ಮಟ್ಟದಲ್ಲಿ ವಿಶೇಷ ಕಾರ್ಯಪಡೆ ರಚಿಸಲು ಆದೇಶಿಸಲಾಗಿದೆ.
ಮತದಾನದ ಹಕ್ಕು ನಮ್ಮ ಕರ್ತವ್ಯ:
ರಾಜ್ಯದಲ್ಲಿ ಎಸ್ಐಆರ್ ಕಾರ್ಯಗಳು ಆರಂಭವಾಗಿದ್ದು, ಸಾರ್ವಜನಿಕರಿಗೆ ಅಗತ್ಯ ದಾಖಲೆಗಳು ಸುಲಭವಾಗಿ ಸಿಗುವಂತೆ ಮಾಡಲು ಬೂತ್ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ಪ್ರತಿಯೊಬ್ಬ ಅರ್ಹರಿಗೂ ಮತದಾನದ ಹಕ್ಕು ಸಿಗುವಂತೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
