*‘ಬಳ್ಳಾರಿ ಚಲೋ’ ಐತಿಹಾಸಿಕ ಪಾದಯಾತ್ರೆಗೆ ಬಳ್ಳಾರಿಯಲ್ಲಿ ತೆರೆ*
*ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ: ಬಿ.ವೈ. ವಿಜಯೇಂದ್ರ*
*ವಾಲ್ಮೀಕಿ ನಿಗಮದ ₹187 ಕೋಟಿ ಹಗರಣದ ಹಣ ದಲಿತರ ಅಭಿವೃದ್ಧಿಗೆ ಮರಳಬೇಕು: ವಿಜಯೇಂದ್ರ ಆಗ್ರಹ*
*ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹200 ಕೋಟಿ ರಸ್ತೆ ಅಭಿವೃದ್ಧಿ ಅನುದಾನ ನೀಡಿ: ರಾಜ್ಯ ಸರ್ಕಾರಕ್ಕೆ ಒತ್ತಾಯ*
*ಬಳ್ಳಾರಿ*,-: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲಿಂಗಸುಗೂರಿನಿಂದ ಆರಂಭವಾಗಿ ಒಂಬತ್ತು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿದ ‘ಬಳ್ಳಾರಿ ಚಲೋ’ ಪಾದಯಾತ್ರೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶದೊಂದಿಗೆ ಸಮಾರೋಪಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಹತ್ತು ದಿನಗಳ ಪಾದಯಾತ್ರೆ ವೇಳೆ ರೈತರು, ಕೂಲಿ ಕಾರ್ಮಿಕರು, ದಲಿತರು ಹಾಗೂ ಅಲೆಮಾರಿ ಸಮುದಾಯದ ಜನರು ತಮ್ಮ ಸಂಕಷ್ಟಗಳನ್ನು ನೇರವಾಗಿ ಹಂಚಿಕೊಂಡಿದ್ದಾರೆ. ಈ ಪಾದಯಾತ್ರೆ ಜನರ ಸಮಸ್ಯೆಗಳನ್ನು ಅರಿಯಲು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.
*15 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶ: ವಿಜಯೇಂದ್ರ*
ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶ ನಡೆಯಲು 15 ವರ್ಷಗಳೇ ಬೇಕಾಯಿತು. ಕಾಂಗ್ರೆಸ್ ಸರ್ಕಾರ ಬಿಜೆಪಿ ಪಾದಯಾತ್ರೆ ಹಾಗೂ ಸಮಾವೇಶಗಳಿಗೆ ಅವಕಾಶ ನೀಡದ ಕಾರಣ ಪ್ರತಿಭಟನೆ ನಡೆಸಬೇಕಾಯಿತು ಎಂದು ವಿಜಯೇಂದ್ರ ಆರೋಪಿಸಿದರು.
ಹಿಂದೆ ಬೆಂಗಳೂರಿನಿಂದ ಮೈಸೂರಿನವರೆಗೆ, ಮೈಸೂರು ಹೆದ್ದಾರಿಯಲ್ಲಿ ಸೇರಿದಂತೆ ಬಿಜೆಪಿ ನಡೆಸಿದ ಪಾದಯಾತ್ರೆಗಳ ಹಿನ್ನೆಲೆಯಲ್ಲಿ ಇದೀಗ ‘ಬಳ್ಳಾರಿ ಚಲೋ’ ನಡೆದಿದೆ ಎಂದು ಅವರು ಹೇಳಿದರು.
*‘ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷಿಸಿದೆ’*
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸೂಕ್ತ ಆದ್ಯತೆ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ಉತ್ತರ ಕರ್ನಾಟಕದ ರೈತರ ಸಮಸ್ಯೆಗಳು, ಬರ ಹಾಗೂ ನೀರಾವರಿ ವಿಚಾರಗಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ತಮ್ಮ ಆರೋಪವಾಗಿದೆ ಎಂದರು.
ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು ಬಿಡದಿ ಟೌನ್ಶಿಪ್, ಟನಲ್ ಯೋಜನೆಗಳಂತಹ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.
ನವಲೆ ಜಲಾಶಯದ ಸಮಾನಾಂತರ ನೀರಾವರಿ ಯೋಜನೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದರು.
*‘ವಾಲ್ಮೀಕಿ ನಿಗಮದ ₹187 ಕೋಟಿ ಹಗರಣದ ಹಣ ದಲಿತರ ಅಭಿವೃದ್ಧಿಗೆ ಬಳಕೆಯಾಗಲಿ’*
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ನಡೆದಿದೆ ಎಂದು ವಿಜಯೇಂದ್ರ ಆರೋಪಿಸಿದರು. ಆ ಹಣವನ್ನು ವಾಪಸ್ ಪಡೆದು ದಲಿತರ ಅಭಿವೃದ್ಧಿಗೆ ಬಳಸಬೇಕು ಎಂದು ಅವರು ಆಗ್ರಹಿಸಿದರು.
ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂಬುದೂ ತಮ್ಮ ಆರೋಪವಾಗಿದೆ ಎಂದು ವಿಜಯೇಂದ್ರ ಹೇಳಿದರು.
ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಆ ಮೀಸಲಾತಿ ಹೆಚ್ಚಳಕ್ಕೆ ಕತ್ತರಿ ಹಾಕಿದೆ ಎಂದು ವಿಜಯೇಂದ್ರ ಆರೋಪಿಸಿದರು.
*‘ರೈತರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ’*
ರಾಜ್ಯದ ವಿವಿಧ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಅಡಿಕೆ ಬೆಳೆಗಾರರಿಗೂ ಸರ್ಕಾರದ ನೀತಿಗಳಿಂದ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದರು.
ಗುಟ್ಕಾ ನಿಷೇಧದ ಪ್ರಸ್ತಾವನೆಯಿಂದ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಯಾವುದೇ ನಿರ್ಧಾರ ಕೈಗೊಳ್ಳುವಾಗ ಅಡಿಕೆ ಬೆಳೆಗಾರರ ಹಿತವನ್ನು ಸರ್ಕಾರ ಪರಿಗಣಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
*‘ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹200 ಕೋಟಿ ನೀಡಿ’*
ರಾಜ್ಯದ 224 ಶಾಸಕರ ಪರವಾಗಿ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದರು. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹200 ಕೋಟಿ ಅನುದಾನ ನೀಡಬೇಕು. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಆಗ್ರಹಿಸಿದರು.
*‘ಡ್ರಗ್ ಮಾಫಿಯಾ ನಿಯಂತ್ರಿಸಲು ಸರ್ಕಾರ ವಿಫಲ’*
ರಾಜ್ಯದಲ್ಲಿ ಡ್ರಗ್ ಮಾಫಿಯಾ ನಡೆಯುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಸರ್ಕಾರಕ್ಕೆ ಗಂಭೀರ ಕಾಳಜಿ ಇಲ್ಲ ಎಂದು ಅವರು ಟೀಕಿಸಿದರು.
*‘ಬರ ಪರಿಹಾರ ನೀಡದೆ ಕೇಂದ್ರದತ್ತ ಬೆರಳು ತೋರಿಸುವುದು ಸರಿಯಲ್ಲ’*
ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರಿಸುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ‘ಬನ್ನಿ ದೆಹಲಿಗೆ ಹೋಗಿ ಕೇಂದ್ರ ಸರ್ಕಾರವನ್ನು ಕೇಳೋಣ’ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಎಂದು ಅವರು ಟೀಕಿಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೆರೆ ಮತ್ತು ಬರ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದರು ಎಂದು ವಿಜಯೇಂದ್ರ ಹೇಳಿದರು.
ಮಹಾರಾಷ್ಟ್ರ ಸರ್ಕಾರ ರೈತರ ಸಾಲ ಮನ್ನಾ ಸೇರಿದಂತೆ ರೈತರ ಪರ ಕ್ರಮಗಳನ್ನು ಕೈಗೊಂಡಿದೆ. ರೈತರನ್ನು ನಿರ್ಲಕ್ಷಿಸಿದರೆ ಯಾವುದೇ ಸರ್ಕಾರವೂ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
*‘ಡಿಕೆಶಿ ಮುಖ್ಯಮಂತ್ರಿಯಾಗಬೇಕೇ?’ ಎಂದು ವಿಜಯೇಂದ್ರ ಪ್ರಶ್ನೆ*
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕಿಂತ ಮೊದಲು ತಾವು ಬಿಸಿನೆಸ್ಮ್ಯಾನ್ ಎಂದು ಹೇಳಿಕೊಂಡಿದ್ದರು ಎಂದು ವಿಜಯೇಂದ್ರ ಉಲ್ಲೇಖಿಸಿದರು. ಇಂತಹ ಮನೋಭಾವ ಹೊಂದಿರುವವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬೇಕೇ ಎಂದು ಅವರು ಪ್ರಶ್ನಿಸಿದರು.
*‘ಕಾಂಗ್ರೆಸ್ ಭಾರತ್ ಜೋಡೋ ಹೆಸರಿನಲ್ಲಿ ಕಪಟ ನಾಟಕ ಮಾಡುತ್ತಿದೆ*’
ಪ್ರಧಾನಿ ನರೇಂದ್ರ ಮೋದಿ ಅವರು ‘ಜನಸೇವಕ’ನಾಗಿ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಅವರು ‘ಭಾರತ್ ಜೋಡೋ’ ಹೆಸರಿನಲ್ಲಿ ಕಪಟ ನಾಟಕ ನಡೆಸುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು ರಾಜ್ಯದ ಜನರು ತೀರ್ಮಾನಿಸಿದ್ದಾರೆ ಎಂಬುದು ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಕಂಡುಬಂದ ಜನಬೆಂಬಲದಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.
*‘ವಂದೇ ಮಾತರಂಗೆ ಕತ್ತರಿ ಹಾಕಲಾಗಿದೆ’*
ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಪ್ರೇರಣೆಯಾಗಿದ್ದ ‘ವಂದೇ ಮಾತರಂ’ ಹಾಡಿನ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಟೀಕೆ ಮಾಡಿದರು.
ಕಾಂಗ್ರೆಸ್ ಸರ್ಕಾರ ಕ್ಯಾಬಿನೆಟ್ನಲ್ಲಿ ಚರ್ಚಿಸಿ ವಂದೇ ಮಾತರಂ ಹಾಡನ್ನು ಕೇವಲ ಎರಡು ಸಾಲುಗಳಿಗೆ ಸೀಮಿತಗೊಳಿಸುವಂತೆ ಆದೇಶಿಸಿದೆ ಎಂದು ಅವರು ಆರೋಪಿಸಿದರು.
*‘ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಜನರು ತೀರ್ಮಾನಿಸಿದ್ದಾರೆ’*
ಡಿಕೆ ಶಿವಕುಮಾರ್ ಅವರು ನೂರು ದಿನಗಳ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಬಿಜೆಪಿ ಹತ್ತು ದಿನಗಳ ಕಾಲ ಜನರ ನಡುವೆ ಪಾದಯಾತ್ರೆ ನಡೆಸಿದೆ. ಪಾದಯಾತ್ರೆಯ ವೇಳೆ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಹಂಚಿಕೊಂಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ಜನರು ತೀರ್ಮಾನಿಸಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
*‘ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಮಾದರಿ’*
ಪ್ರಧಾನಿ ನರೇಂದ್ರ ಮೋದಿ ಅವರು 2001ರಿಂದ ಮುಖ್ಯಮಂತ್ರಿಯಾಗಿ ಹಾಗೂ 2014ರಿಂದ ಪ್ರಧಾನಮಂತ್ರಿಯಾಗಿ ಸುಮಾರು 25 ವರ್ಷಗಳ ಕಾಲ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಮೋದಿ ಅವರ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ ಎಂದು ವಿಜಯೇಂದ್ರ ಹೇಳಿದರು.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಪ್ರಧಾನಿ ಮೋದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
*ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 17ರಿಂದ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ’ ಕಾರ್ಯಕ್ರಮಗಳನ್ನು ಆಚರಿಸಲು ನಿರ್ಧರಿಸಲಾಗಿದೆ. ಜನಸೇವೆ ಹಾಗೂ ರಾಷ್ಟ್ರಸೇವೆಯ ಸಂಕಲ್ಪದೊಂದಿಗೆ ಬಿಜೆಪಿ ಮುಂದುವರಿಯಲಿದೆ ಎಂದು ವಿಜಯೇಂದ್ರ ಹೇಳಿದರು*.
ಮುಂದಿನ ರಾಜಕೀಯ ಬದಲಾವಣೆಯ ಮುನ್ನುಡಿ: ಬಿ.ಎಸ್.ಯಡಿಯೂರಪ್ಪ
: ಬಳ್ಳಾರಿಯಲ್ಲಿ ಇಂದು ನಮ್ಮ ಪಾದಯಾತ್ರೆ ಇಂದು ಮುಕ್ತಾಯವಾಗಿದೆ. ಆದರೆ ನಮ್ಮ ಹೋರಾಟ ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೆ ಮುಂದುವರಿಯಲಿದೆ. ರಾಯಚೂರಿನಿಂದ ಬಳ್ಳಾರಿವರೆಗಿನ ನಮ್ಮ ಹೆಜ್ಜೆಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಬಡಿದೆಬ್ಬಿಸಿ ಮುಂದಿನ ರಾಜಕೀಯ ಬದಲಾವಣೆ ಮುನ್ನುಡಿ ಬರೆಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಇಂದು ಮಾತನಾಡಿದ ಅವರು, ವಿಜಯೇಂದ್ರ ಅವರ ನೇತೃತ್ವದಲ್ಲಿ ಹತ್ತು ದಿನ ಪಾದಯಾತ್ರೆ ನಡೆದಿದೆ. ಈ ವೇಳೆ ಪಾದಯಾತ್ರೆಯ ದಾರಿಯುದ್ದಕ್ಕೂ ಜನ ಬೆಂಬಲ ನೀಡಿ, ಆಶೀರ್ವಾದ ಮಾಡಿದರು. ತಿಲಕ ಇಟ್ಟು ಆರತಿ ಬೆಳಗಿದರು. ಇದನ್ನು ನಾವು ಊಹಿಸಲು ಸಾಧ್ಯವಿಲ್ಲ ಎಂದರು.
ಮುಂದೆ ನಮ್ಮ ಬಿಜೆಪಿ ಸರ್ಕಾರ ತರುವವರೆಗೆ ನಮ್ಮ ಹೋರಾಟ ನಡೆಯಲಿದೆ. ಇದು ನಾವು ಮಾಡಿದ ಕೇವಲ ಪಾದಯಾತ್ರೆ ಅಲ್ಲ. ಜನರು ಬಯಸಿದ ಪರಿವರ್ತನೆಯ ಮುನ್ನುಡಿ. ಬಿಸಲ ಬೇಗೆಯನ್ನು ಎದುರಿಸಿ ಪಾದಯಾತ್ರೆ ನಡೆದಿದೆ. ನಾಡಿನ ಮತ್ತು ದೇಶದ ಗಮನ ಸೆಳೆದಿದೆ ಎಂದು ಹೇಳಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೆ ನಾವು ವಿಶ್ರಮಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಡೆಸಿದ ಭ್ರμÁ್ಟಚಾರವನ್ನು ಬಯಲು ಮಾಡಿ ಬದಲಾವಣೆ ತರುತ್ತೇವೆ ಎಂದು ಸವಾಲು ಹಾಕಿದರು.
ಬಿಜೆಪಿ ಜಾರಿಗೆ ತಂದ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಿಲ್ಲಿಸಿತು. ಕಿಸಾನ್ ಸಮ್ಮಾನ್ ನಿಧಿಯಲ್ಲಿ ಹಣ ಕಡಿಮೆ ಮಾಡಿದರು. ಭಾಗ್ಯಲಕ್ಷ್ಮಿ ಬಾಂಡ್ ನೀಡಲಿಲ್ಲ. ಬಡವರ ಹಣ ಹೊಡೆದು ಲೂಟಿ ಮಾಡಿದರು ಎಂದು ದೂರಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿ ಕಾಂಗ್ರೆಸ್ ಮೇಲೇಳದಂತೆ ಕೆಲಸ ಮಾಡೋಣ ಎಂದ ಅವರು, ಪಾದಯಾತ್ರೆಗೆ ಉತ್ತಮ ಪ್ರಚಾರ ನೀಡಿದ ಮಾಧ್ಯಮಳಿಗೆ ಅಭಿನಂದನೆ ಸಲ್ಲಿಸಿದರು.
