ಬೈಕ್ ಡಿಕ್ಕಿ: ಪಾದಚಾರಿ ಸಾವು
ಪಾವಗಡ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ತಾಲ್ಲೂಕಿನ ಟಿ.ಎನ್.ಪೇಟೆ ಗ್ರಾಮದಲ್ಲಿ ನಡೆದಿದೆ.
ನಾಗಲಮಡಿಕೆ ಹೋಬಳಿಯ ಶ್ರೀರಂಗಪುರ ತಾಂಡದ ಗೋವಿಂದ ನಾಯ್ಕ (58) ಮೃತರು. ಟಿ.ಎನ್.ಪೇಟೆ ಬಳಿಯ ಖಾಸಗಿ ಕ್ರಷರ್ನಲ್ಲಿ ಕೆಲಸ ಮಾಡುತ್ತಿದ್ದ ಅವರು, ಸೆ.17ರಂದು ಸಂಜೆ 5.30ರ ಸುಮಾರಿಗೆ ರಾಜು ನಾಯ್ಕ ಅಂಗಡಿಯಿಂದ ಕ್ರಷರ್ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ರೊಪ್ಪ ಕಡೆಯಿಂದ ಟಿ.ಎನ್.ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮಾರುತಿ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಗೋವಿಂದ ನಾಯ್ಕ ಅವರ ತಲೆ, ಭುಜ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು.
ಸ್ಥಳೀಯರು ಅವರನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೆ.17ರ ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬೈಕ್ ಸವಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೃತರ ಸಂಬಂಧಿಕರು ಪಾವಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವರದಿ: ಶ್ರೀನಿವಾಸಲುಎ
