fa61f151 d256 4ff8 9c7c 8bac5b109124 1

ಕೊರೊನಾ- ಪ್ಲಾಸ್ಮಾ ಥೆರಪಿ ಸ್ವಯಂ ಪ್ರೇರಣೆಯಿಂದ ರಕ್ತದಾನ : ಸಚಿವ ಶ್ರೀರಾಮುಲು

DISTRICT NEWS

ತುಮಕೂರು(ಕ.ವಾ)ಏ.25: ಕೊರೊನಾ ವೈರಸ್‍ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ಮುಂದಾಗಿದ್ದು,  ಸೋಂಕಿನಿಂದ ಗುಣಮುಖರಾಗಿರುವವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೋವಿಡ್-19 ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಮೊದಲ ಬಾರಿಗೆ ದಿಟ್ಟ ಹೆಜ್ಜೆಯೊಂದನ್ನು ಇಡುತ್ತಿದೆ. ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಡಾ.ಯುಎಸ್ ವಿಶಾಲ್ ರಾವ್ ನೇತೃತ್ವದ ತಂಡ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ ಎಂದರಲ್ಲದೇ ಆದ್ದರಿಂದ ರಾಜ್ಯದಲ್ಲಿ 489 ಪಾಸಿಟಿವ್ ಪ್ರಕರಣಗಳಲ್ಲಿ 153 ಜನರು ಗುಣಮುಖರಾಗಿದ್ದಾರೆ. ಇವರನ್ನು ಸಂಪರ್ಕ ಮಾಡುತ್ತಿದ್ದೇವೆ. ಇವರು 15 ದಿನಕ್ಕೊಮ್ಮೆ ರಕ್ತ ನೀಡಬಹುದು. ಗುಣಮುಖರಾದವರು ಸ್ವಯಂ ಪ್ರೇರಣೆಯಿಂದ ಬಂದು ನಮಗೆ ಸಹಕಾರ ನೀಡಬೇಕು ಎಂದರು.

0d2ece1c 294e 44fc 8412 301bbef73f3c

ಜಿಲ್ಲೆಯಲ್ಲಿ ಖಾಸಗಿ ಕ್ಲಿನಿಕ್ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಐಎಲ್‍ಎ ಮತ್ತು ಸಾರಿ ಪ್ರಕರಣಗಳಲ್ಲಿ ಲಕ್ಷಣಗಳಿರುವವರಿಗೆ ಕ್ವಾರೆಂಟೈನ್ ಮಾಡಲಾಗುತ್ತಿದೆ. ಈವರೆಗೂ 140 ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಡಿಹಚ್‍ಓ ಕಚೇರಿಯಲ್ಲಿ 2 ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದ್ದು, ಲಕ್ಷಣಗಳಿರುವವರು ಕರೆ ಮಾಡುವವರ ಮಾಹಿತಿಯನ್ನು  ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುತ್ತಿದೆ ಎಂದು ಡಿಹೆಚ್‍ಓ ಡಾ|| ಚಂದ್ರಿಕಾ ಅವರು ಸಚಿವರಿಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಮಾತನಾಡಿ, ವಿದೇಶದಿಂದ ಬಂದವರ  ಕ್ವಾಂರೆಟೈನ್ ಅವಧಿ ಮುಗಿದಿದ್ದರೂ ಸಹ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಹೆಚ್ಚಿನ ಸೋಂಕು ಹರಡಿರುವ ದೇಶದಿಂದ ಬಂದವರ ಮಾದರಿಗಳು 2ನೇ ಬಾರಿಯೂ ನೆಗೆಟಿವ್ ಬಂದಿದೆ. ಜಿಲ್ಲಾಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಪರಿರ್ವತಿಸಲಾಗಿದ್ದು, ಹೆಚ್ಚಿನ ವೆಂಟಿಲೇಟರ್ ಅವಶ್ಯಕತೆಯಿದೆ ಎಂದರು. ಅಲ್ಲದೇ ಖಾಸಗಿ ಆಸ್ಪತ್ರೆಗಳಿಂದ ಬಂದಿರುವ ಉಸಿರಾಟದ ಸಮಸ್ಯೆ, ಜ್ವರ ಲಕ್ಷಣಗಳಿರುವವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

ನಂತರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವರು, ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯವು ಕೋವಿಡ್-19ರ ನಿಯಂತ್ರಣದಲ್ಲಿ 11ನೇ ಸ್ಥಾನದಲ್ಲಿದೆ.  ಕೊರೊನಾ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಇಲಾಖೆ ಸೇರಿದಂತೆ ಒಟ್ಟು 10 ಇಲಾಖೆಗಳ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರಲ್ಲದೇ ಜಿಲ್ಲೆಗೆ ಅಗತ್ಯವಾದ 8000 ರ್ಯಾಪಿಡ್ ಟೆಸ್ಟ್ ಕಿಟ್‍ಗಳನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಜಿಲ್ಲೆಯಲ್ಲಿ 3 ಪಾಸಿಟಿವ್ ಪ್ರಕರಣ ಬಂದಿದ್ದು, ಅದರಲ್ಲಿ ಒಬ್ಬರು ಮೃತಪಟ್ಟಿದ್ದು,  1 ಗುಣಮುಖ, ಒಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಂಟೈನ್ಮೆಂಟ್ ವಲಯವೆಂದು ಸೀಲ್‍ಡೌನ್ ಮಾಡಿರುವ ಕಡೆ ಹೆಚ್ಚಿನ ಬಂದೋಬಸ್ತ್ ಹೇರಬೇಕು ಎಂದರು.

ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳ ಮೇಲೆ ದಬ್ಬಾಳಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ 5 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 2.50 ಲಕ್ಷ ದಂಡ ವಿಧಿಸಲಾಗುವುದು ಎಂದರು. ಕೋವಿಡ್-19ರ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಪೊಲೀಸರು ಹಾಗೂ ಪತ್ರಕರ್ತರಿಗೂ ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

9fd17164 a9e3 40a9 a59d 273c0ac03a1f

ರಾಜ್ಯದಲ್ಲಿ ಸದ್ಯ 19 ಪ್ರಯೋಗಾಲಯಗಳಿದ್ದು, ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆ 40  ಪ್ರಯೋಗಾಲಯಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ವೀರಭದ್ರಯ್ಯ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಸಭೆಯ ನಂತರ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್-19ರ ನಿಯಂತ್ರಣ ಸಂಬಂಧ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.